ಮಂಗಳೂರು: 2009 ರಲ್ಲಿ ನಡೆದಿದ್ದ ಸಂತು ಅಲಿಯಾಸ್,ಕ್ಯಾಂಡಲ್ ಸಂತು ಅಲಿಯಾಸ್ ಸಂತೋಷ್ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ದೋಷಿಗಳು ಎಂದು ಪರಿಗಣಿಸಿದಮಂಗಳೂರಿನ ನಾಲ್ಕನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಇಕ್ಬಾಲ್ ಕಾವೂರು ಹಾಗೂ ಫಾರೂಕ್ ಕಾರ್ಕಳಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ.
ಕೊಲೆ ಪ್ರಕರಣ ಕುರಿತು ಸುಧೀರ್ಘ ವಿಚಾರಣೆ ನಡೆಸಿದ ನಾಲ್ಕನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಇಬ್ಬರು ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿದ್ದು ಅವರನ್ನು ಅಪರಾಧಿಗಳು ಎಂದು ಪ್ರಕಟಿಸಿ ಜೀವಾವಧಿ ಶಿಕ್ಷೆ ಹಾಗೂ ತಲಾ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿ ನ್ಯಾಯಾಲಯ ಆದೇಶಿಸಿದೆ.
2009 ರ ಫೆಬ್ರವರಿ18 ರಂದು ಬೆಳಿಗ್ಗೆ 9.30 ಗಂಟೆಯ ಸಮಯದಲ್ಲಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಹೋಗುತ್ತಿದ್ದ ಸಂತು ಅಲಿಯಾಸ್ ಸಂತೋಷ್ ಎಂಬುವವನಿಗೆ ನೀಲಿ ಬಣ್ಣದ ಕಾರಿನಲ್ಲಿ ಬಂದ ಅಪರಿಚಿತರ ಗುಂಪೊಂದು ಸಂತೋಷನ ತಲೆ ಹೊಟ್ಟೆ ಭಾಗಕ್ಕೆ ಕತ್ತಿಯಿಂದ ಕಡಿದು ತೀವ್ರವಾಗಿ ಗಾಯಗೊಳಿಸಿದ ಕಾರಣ ಮರಣ ಹೊಂದಿದ್ದನು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 19/09 ಕಲಂ 143,147,148 302 r/w 149 IPC ರಂತೆ ಪ್ರಕರಣವೂ ದಾಖಲಾಗಿದ್ದು ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು 22 ಜನ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.
ಪ್ರಕರಣದ ತನಿಖೆಯನ್ನು ನಡೆಸಿದ ಆಗಿನ ಬಂಟ್ವಾಳ ಗ್ರಾಮಾಂತರ ವೃತ್ತ ನಿರೀಕ್ಷಕ ನಂಜುಂಡೇಗೌಡ ಹಾಗೂ ಪೊಲೀಸ್ ಸಿಬ್ಬಂದಿಯನ್ನು ಪೊಲೀಸ್ ಅಧೀಕ್ಷಕ ಬಿ.ಆರ್. ರವಿಕಾಂತೇಗೌಡ ಪ್ರಶಂಶಿಸಿದ್ದು ಸೂಕ್ತ ಬಹುಮಾನವನ್ನು ಘೋಷಿಸಿದ್ದಾರೆ.









