ನವದೆಹಲಿ: ಲೋಕಸಭೆ ಚುನಾವಣೆಯನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಎದುರಿಸುವ ಬಗ್ಗೆ ಯಾರೂ ಆಕ್ಷೇಪ ವ್ಯಕ್ತಪಡಿಸಿಲ್ಲ ಮಾಜಿ ಮುಖ್ಯಮಂತ್ರಿ ಸುದ್ಧರಾಮಯ್ಯ ತಿಳಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಆಷಾಡ ಮಾಸದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಈಗಾಗಲೇ ಸಚಿವ ಸಂಪುಟ ವಿಸ್ತರಣೆ ಮಾಡಬೇಕಿತ್ತು. ಆದರೆ, ಆಷಾಡ ಮಾಸ ಬಂದದ್ದರಿಂದ ಮಾಡಲಾಗಲಿಲ್ಲ. ಆಷಾಡ ಮಾಸದ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಈ ಬಗ್ಗೆ ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸಿರುವುದಾಗಿ ಹೇಳಿದರು.
ಉಳಿದಂತೆ ಮೊದಲ ಹಂತದಲ್ಲಿ 30 ನಿಗಮ ಮತ್ತು ಮಂಡಳಿಗಳಿಗೆ ನೇಮಕಾತಿ ಮಾಡಲು ತಿರ್ಮಾನಿಸಲಾಗಿದ್ದು, ಕಾಂಗ್ರೆಸ್ಗೆ 20 ಮತ್ತು ಜೆಡಿಎಸ್ ಪಕ್ಷಕ್ಕೆ 10 ಸ್ಥಾನಗಳನ್ನು ನೀಡಲು ತೀರ್ಮಾನಿಸಲಾಗಿದೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಮಾಡಿಕೊಳ್ಳುತ್ತಿರುವ ಮೈತ್ರಿ ಬಗ್ಗೆ ಪಕ್ಷದಲ್ಲಿ ಯಾರ ಆಕ್ಷೇಪವೂ ಇಲ್ಲ. ಮೈತ್ರಿಗೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಇನ್ನು ಪರಿಷತ್ ಸಭಾಪತಿ ಸ್ಥಾನದ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.









