ಬೆಂಗಳೂರು: ಮೈಸೂರು ರಸ್ತೆ ಭಾಗದಲ್ಲಿ ಬಿಡಿಎ ನಿರ್ಮಿಸಿರುವ ಬಿಡಿಎ ಫ್ಲ್ಯಾಟ್ ಖರೀದಿಗೆ ಮುಂದಾಗುವ ಸಾರ್ವಜನಿಕರಿಗೆ ಶೇ.೫ ರಷ್ಟು ಹಾಗೂ ಒಮ್ಮೆಲೆ ೧೦ಕ್ಕೂ ಹೆಚ್ಚು ಫ್ಲ್ಯಾಟ್ ಖರೀದಿಸುವವರಿಗೆ ಶೇ.೧೦ ರಷ್ಟು ರಿಯಾಯಿತಿ ನೀಡಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
ಬಿಡಿಎ ಕಚೇರಿಯಲ್ಲಿ ನಡೆದ ಬಿಡಿಎ ಆಡಳಿತ ಮಂಡಳಿ ಸಭೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಮೈಸೂರು ರಸ್ತೆ ಭಾಗದಲ್ಲಿ ಅಪಾರ್ಟ್ಮೆಂಟ್ ನಿರ್ಮಿಸಿದ್ದು, ಇಲ್ಲಿ ಫ್ಲ್ಯಾಟ್ಗಳ ಖರೀದಿಗೆ ಮುಂದಾಗುವವರಿಗೆ ಆಫರ್ ನೀಡಲು ತೀರ್ಮಾನಿಸಲಾಗಿದೆ. ಇದರಿಂದ ಶೀಘ್ರವೇ ಅಪಾರ್ಟ್ಮೆಂಟ್ ಖರೀದಿಯಾದರೆ ಮುಂದಿನ ಪ್ರಾಜೆಕ್ಟ್ ಕೈಗೊಳ್ಳಲು ಸಾಧ್ಯ. ಹೀಗಾಗಿ ರಿಯಾಯಿತಿ ಘೋಷಿಸಿದ್ದೇವೆ ಎಂದರು.
ಡಾ.ಶಿವರಾಂ ಕಾರಂತರ ಬಡಾವಣೆ ೧೭ ಗ್ರಾಮಗಳಲ್ಲಿ 3564 ಎಕರೆ ಜಮೀನು ಸ್ವಾಧೀನ ಮಾಡಿ, ಸಾರ್ವಜನಿಕರಿಗೆ ನಿವೇಶನ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಪ್ರಕರಣ ಕುರಿತು ಸುಪ್ರೀಂಕೋರ್ಟ್ ಮೂರು ತಿಂಗಳೊಳಗೆ ನೋಟಿಫೈ ಮಾಡಲು ಆದೇಶ ನೀಡಿತ್ತು. ಅಂತೆಯೇ, ನಿವೇಶನ ಹಂಚಿಕೆ ಸಂಬಂಧ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿ, ಸಚಿವ ಸಂಪುಟದಿಂದ ಒಪ್ಪಿಗೆ ಪಡೆದುಕೊಳ್ಳಲಾಗುವುದು ಎಂದು ಹೇಳಿದರು.
ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ. ೬೫ ಕಿ.ಮೀ. ಉದ್ದದ ರಸ್ತೆ ನಿರ್ಮಾಣಕ್ಕೆ ೫ ಸಾವಿರ ಕೋಟಿ ರೂಪಾಯಿ ಅಂದಾಜು ಮಾಡಲಾಗಿದೆ. ಜೈಕಾ ಕಂಪನಿ ಸಹಯೋಗದೊಂದಿಗೆ ಈ ಯೋಜನೆ ಕಾರ್ಯಗತವಾಗಲಿದೆ ಎಂದು ತಿಳಿಸಿದರು.
ಹಳೇ ಮದ್ರಾಸ್ ರಸ್ತೆ ಕೋಣದಾಸಪುರದ ಬಳಿ ೧೬೫ ಎಕರೆಯಲ್ಲಿ ಇನೋವೇಟಿವ್ ಸಿಟಿ ನಿರ್ಮಾಣಕ್ಕೂ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಹಿಂದಿನ ಸರ್ಕಾರದಲ್ಲಿಯೇ ಈ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ಈ ಯೋಜನೆಯನ್ನು ಬಿಡಿಎ ಕೈಗೆತ್ತಿಕೊಂಡಿದ್ದು, ಆದಷ್ಟು ಶೀಘ್ರವೇ ಯೋಜನೆಯ ವರದಿ ಸಲ್ಲಿಸಲು ಸಂಬಂಧ ಪಟ್ಟ ಖಾಸಗಿ ಕಂಪನಿಗೆ ಸೂಚಿಸಲಾಗಿದೆ. ಇದರ ಡಿಪಿಆರ್ ಆದ ಮೇಲೆ ಅಂದಾಜು ವೆಚ್ಚ ತಿಳಿಯಲಿದೆ ಎಂದರು.
ಬನಶಂಕರಿ ೬ನೇ ಹಂತದಲ್ಲಿ ೬ ಎಕರೆಯಲ್ಲಿ ಪಿಪಿಪಿ ಮಾದರಿಯಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಲು ತೀರ್ಮಾನಿಸಲಾಗಿದೆ.
ತುಮಕೂರು ರಸ್ತೆ ದಾಸನಪುರ ಹಳ್ಳಿದಲ್ಲಿ ವಿಲ್ಲಾ ಕಟ್ಟಿದ್ದೇವೆ. ಇದಕ್ಕೆ ಬೇಡಿಕೆ ಹೆಚ್ಚುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ೨೫೦ ಕೋಟಿ ರು. ವೆಚ್ಚದಲ್ಲಿ ಇನ್ನಷ್ಟು ವಿಲ್ಲಾ ಕಟ್ಟಲು ಮಂಜೂರಾತಿ ಕೊಟ್ಟಿದ್ದೇವೆ ಎಂದು ಮಾಹಿತಿ ನೀಡಿದರು.
೨೫ಕ್ಕೆ ಕೆಂಪೇಗೌಡ ನಿವೇಶನ ಹಂಚಿಕೆ
ಇದೇ ವೇಳೆ ಮಾತನಾಡಿದ ಪರಮೇಶ್ವರ್, ಕೆಂಪೇಗೌಡ ಬಡಾವಣೆಯಲ್ಲಿನ ೫ ಸಾವಿರ ನಿವೇಶನವನ್ನು ಸೆ.25ಕ್ಕೆ ಲಾಟರಿ ಮೂಲಕ ಹಂಚಿಕೆ ಮಾಡಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.









