ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರೋಧಿಸಿ ಸೈಕಲ್ ಚಳವಳಿ ನಡೆಸಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.
ಪ್ರತಿಭಟನೆಯ ಅಂಗವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಬೆಳಗ್ಗೆ 9.30ಕ್ಕೆ ತಮ್ಮ ಮನೆಗಳಿಂದ ಪಕ್ಷದ ಕಚೇರಿಗೆ ಸೈಕಲ್ ನಲ್ಲಿ ಬರಲಿದ್ದಾರೆ.
ಬಳಿಕ ಕೇಂದ್ರ ಸರ್ಕಾರದ ಕಚೇರಿ ಎದರು ಪ್ರತಿಭಟನೆ ನಡೆಯಲಿದೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಏಕ ಕಾಲಕ್ಕೆ ಪ್ರತಿಭಟನೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಇಂದು ನಡೆದ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಕೊರೊನಾ ನಿಯಂತ್ರಣದಲ್ಲಿ ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯ, ಭೂ ಸುಧಾರಣೆ ಕಾಯಿದೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯಿದೆ ತಿದ್ದುಪಡಿ ವಿರೋಧಿಸಿಯೂ ಚಳವಳಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಶಿವಕುಮಾರ್ ಅವರು ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.









