ಉತ್ತಮವಾಗಿ ನಡೆದ ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ ಪರೀಕ್ಷೆ : ಸುರೇಶ್ ಕುಮಾರ್

0
3

ಬೆಂಗಳೂರು: ಐದನೇ ದಿನವಾದ ಬುಧವಾರ ನಡೆದ ಎಸ್ಸೆಸ್ಸೆಲ್ಸಿ ಸಮಾಜವಿಜ್ಞಾನ ಪರೀಕ್ಷೆ ಸಾಮಾಜಿಕ ಸುರಕ್ಷಿತ ವಾತಾವರಣದಲ್ಲಿ ಉತ್ತಮವಾಗಿ ನಡೆದಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬುಧವಾರದ ಪರೀಕ್ಷೆ ನಂತರ ಸುದ್ದಿಗೋಷ್ಠಿಯಲ್ಲಿ ಇಂದಿನ ಪರೀಕ್ಷೆಗಳ ಕುರಿತು ಮಾಹಿತಿ ನೀಡಿದ ಅವರು, ಐದನೇ ದಿನವಾದ ಬುಧವಾರ ನಡೆದ ಸಮಾಜವಿಜ್ಞಾನ ಪರೀಕ್ಷೆಗೆ ನೊಂದಾಯಿತ 7,84,287 ವಿದ್ಯಾರ್ಥಿಗಳ ಪೈಕಿ 7,68,341 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟಾರೆ ಶೇ. 97.96ರಷ್ಟು ಇಂದು ಹಾಜರಾತಿ ಇದೆ. 15,946 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಈ ವಿಷಯದ ಪರೀಕ್ಷೆಗೆ ಕಳೆದ 2018-19ನೇ ಸಾಲಿಗೆ 7,77858 ವಿದ್ಯಾರ್ಥಿಗಳ ಪೈಕಿ 7,68,374 ವಿದ್ಯಾರ್ಥಿಗಳು ಹಾಜರಾಗಿದ್ದು, 9484 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಶೇ. 98.78 ಹಾಜರಾತಿ ಇತ್ತು ಎಂದು ಅವರು ಹೇಳಿದರು.
ಮೊದಲ ಬಾರಿಗೆ 7,45,070 ಶಾಲಾ ವಿದ್ಯಾರ್ಥಿಗಳು ಹಾಗೂ 20, 991 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಕಂಟೈನ್ಮೆಂರಟ್ ಪ್ರದೇಶಗಳ 3363 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೋವಿಡೇತರ ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 613 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ ಯಾವುದೇ ಪ್ರಕರಣಗಳು ನಡೆದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಸರ್ಕಾರಿ/ಖಾಸಗಿ ವಸತಿ ನಿಲಯಗಳಲ್ಲಿ ಇದ್ದು 1442 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ನೆರೆ ರಾಜ್ಯಗಳಿಂದ 645ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದ್ದು, 52 ವಿದ್ಯಾರ್ಥಿಗಳು ಗೈರು ಹಾಜರಿಯಾಗಿ 593ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 12644 ವಲಸೆ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದು, 12541 ವಿದ್ಯಾರ್ಥಿಗಳು ಹಾಜರಾಗಿದ್ದರೆ, 103 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಹೋಂ ಕ್ವಾರಂಟೈನಲ್ಲಿರುವ ಹಾಗೂ ಕೋವಿಡ್ ಪಾಸಿಟೀವ್ ಎಂದು ಗುರುತಿಸಲಾದ ವಿದ್ಯಾರ್ಥಿಗಳಿಗೆ ಈಗಿನ ಪರೀಕ್ಷೆಯನ್ನು ಬರೆಯುವುದರಿಂದ ವಿನಾಯ್ತಿ ನೀಡಲಾಗಿದೆ. ಈ ಎಲ್ಲರಿಗೂ ಸಕಾರಣದ ಆಧಾರದ ಮೇಲೆ ಮುಂದಿನ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡುವ ವ್ಯವಸ್ಥೆ ಮಾಡಲಾಗುವುದು. ಪರೀಕ್ಷಾ ಕೇಂದ್ರಕ್ಕೆ 3212 ಬಸ್ ಹಾಗೂ ಇತರೆ ವಾಹನಗಳನ್ನು ಒಪ್ಪಂದದ ಮೇರೆಗೆ ಪಡೆದು ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಸಾರಿಗೆ ಸೌಲಭ್ಯ ಒದಗಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ಭೇಟಿ:

ಬುಧವಾರ ರಾಮನಗರ ಜಿಲ್ಲೆಯ ಕನಕಪುರ, ಚನ್ನಪಟ್ಟಣ ಮತ್ತು ರಾಮನಗರ ತಾಲೂಕುಗಳ 13 ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಎಲ್ಲ ವ್ಯವಸ್ಥೆಗಳನ್ನು ಗಮನಿಸಿದ್ದೇನೆ. ಎಲ್ಲ ಕಡೆ ಅಚ್ಚುಕಟ್ಟಾದ ವ್ಯವಸ್ಥೆಗಳನ್ನು ಮಾಡಲಾಗಿದೆ. ಮಕ್ಕಳು ನೆಮ್ಮದಿ ಮತ್ತು ಆಹ್ಲಾದಕರ ವಾತಾವರಣದಲ್ಲಿ ಪರೀಕ್ಷೆ ಬರೆಯುತ್ತಿದ್ದುದು ಕಂಡುಬಂದಿದೆ ಎಂದು ಸಚಿವರು ತಿಳಿಸಿದ್ದಾರೆ.

ಪರೀಕ್ಷೆಯ ಪ್ರಮುಖ ಸಂಗತಿಗಳು:

ಇಂದಿನ ಸಮಾಜ ವಿಜ್ಞಾನ ಪರೀಕ್ಷೆಯ ಸಂದರ್ಭದಲ್ಲಿ ಅಲ್ಲಲ್ಲಿ ಕಂಡು ಬಂದ ಸಂಗತಿಗಳನ್ನು ಸಚಿವರು ವಿವರಿಸಿದರು:

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸಿನಹಾಡ್ಯ ಗ್ರಾಮದ ವಿದ್ಯಾರ್ಥಿನಿ ಕಲ್ಪನಾ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಕಾಲಿಗೆ ಸುಟ್ಟಗಾಯಗಳಾಗಿರುವುದನ್ನು ಲೆಕ್ಕಿಸದೆ ಪರೀಕ್ಷೆಕಗೆ ಹಾಜರಾಗಿದ್ದಾಳೆ. ಈಕೆಯನ್ನು ನಮ್ಮ ಇಲಾಖೆ ಅಧಿಕಾರಿಗಳು ತಮ್ಮ ವಾಹನದಲ್ಲಿ 22 ಕಿಮೀ. ದೂರದಿಂದ ಕರೆತಂದು ಶೃಂಗೇರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪರೀಕ್ಷೆ ಬರೆಸಿದ್ದಾರೆ. ಆ ವಿದ್ಯಾರ್ಥಿನಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುವೆ ಎಂದು ಅವರು ತಿಳಿಸಿದರು.

ಇಂದು ಶಿರಸಿ ಶೈಕ್ಷಣಿಕ ಜಿಲ್ಲೆಯ ಬಂಕೇಶ್ವರ ಗ್ರಾಮದ ಪ್ರೌಢಶಾಲೆಯ ತಾರಾ ಎಂಬ ವಿದ್ಯಾರ್ಥಿನಿಯ ತಂದೆ ಆಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಕರೆತರುತ್ತಿರುವ ಸಂದರ್ಭದಲ್ಲಿ ಅಪಘಾತಕ್ಕೀಡಾಗಿದ್ದರಿಂದ ವಾಹನವಿಲ್ಲದೇ ಪರಿತಪಿಸುತ್ತಿದ್ದ ಸಂದರ್ಭದಲ್ಲಿ ನಮ್ಮ ಶಿಕ್ಷಕರು ಅವರ ಸ್ವಂತ ವಾಹನದಲ್ಲಿ ಆಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಸಕಾಲದಲ್ಲಿ ಕರೆತಂದು ಪರೀಕ್ಷೆ ಬರೆಯುವಂತೆ ಮಾಡಿದ್ದಾರೆ. ಆಕೆಯ ತಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸುರಕ್ಷಿತವಾಗಿದ್ದಾರೆ ಎಂದು ಸಚಿವರು ತಿಳಿಸಿದರು.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೂಡಲಗಿ ತಾಲೂಕಿನ ಘಟಪ್ರಭಾದ ಕೆ.ಆರ್. ಹುಕ್ಕೇರಿ ಪ್ರೌಢಶಾಲೆಯ ಕುಲಗೋಡು ಎಂಬ ವಿದ್ಯಾರ್ಥಿ ಪರೀಕ್ಷೆಗೆಂದು ಸಂಬಂಧಿಕರ ವಾಹನದಲ್ಲಿ ಬರುತ್ತಿದ್ದಾಗ ಅಪಘಾತವಾಗಿ ಸಣ್ಣಪುಟ್ಟ ಗಾಯಗಳಾಗಿದ್ದು, ಮಾನಸಿಕ ಆಘಾತಕ್ಕೊಳಗಾಗಿದ್ದರಿಂದ ಇಂದಿನ ಪರೀಕ್ಷೆಗೆ ವಿನಾಯ್ತಿ ಕಲ್ಪಿಸಿ ವೈದ್ಯಕೀಯ ಶುಶ್ರೂಷೆ ನೀಡಲಾಗಿದೆ. ಮುಂದಿನ ಪರೀಕ್ಷೆಗಳಿಗೆ ಈತ ಹಾಜರಾಗಲಿದ್ದಾನೆ. ಇಂದಿನ ವಿಷಯಕ್ಕೆ ಸಂಬಂಧಿಸಿದಂತೆ ಆತನಿಗೆ ಪೂರಕ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಅವರು ಹೇಳಿದರು.

ಸಮಾಜ ವಿಜ್ಞಾನ ವಿಷಯದ ಪರೀಕ್ಷೆಗೆ ಶಿರಸಿ ಶೈಕ್ಷಣಿಕ ಜಿಲ್ಲೆಯ ಯಲ್ಲಾಪುರದ ಸೀಲ್ ಡೌನ್ ಪ್ರದೇಶದಿಂದ ಇಬ್ಬರು ವಿದ್ಯಾರ್ಥಿಗಳನ್ನು ವಿಶೇಷ ವಾಹನದ ಮೂಲಕ ಕರೆತಂದು ಯಲ್ಲಾಪುರದ ವಿಶ್ವದರ್ಶನ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಸುವ ವ್ಯವಸ್ಥೆ ಮಾಡಲಾಗಿದೆ.

ಇಂದಿನ ಮಾಧ್ಯಮಗಳಲ್ಲಿ ವರದಿಯಾದಂತೆ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿಗಳನ್ನು ನಿರ್ಬಂಧಿಸಿ ಪರೀಕ್ಷಾ ಅಕ್ರಮಗಳನ್ನು ಪ್ರೋತ್ಸಾಹಿಸುವ ಪ್ರಕರಣಗಳು ವರದಿಯಾಗಿದ್ದು, ಯಾವದೇ ಕೇಂದ್ರದ ಮುಖ್ಯಸ್ಥರು, ಪ್ರತಿದಿನದ ಪರೀಕ್ಷೆ ಮುಗಿದ ಬಳಿಕ ಸಿಸಿ ಟಿವಿ ಫುಟೇಜ್ ಗಳನ್ನು ಮೇಲಧಿಕಾರಿಗಳಿಗೆ ಕಡ್ಡಾಯವಾಗಿ ಸಲ್ಲಿಸತಕ್ಕದ್ದು ಹಾಗೂ ಅದನ್ನು ಪರಾಮರ್ಶಿಸುವುದನ್ನು ಕಡ್ಡಾಯವಾಗಿ ನಿರ್ವಹಿಸತಕ್ಕದ್ದೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಪರೀಕ್ಷಾ ಕೇಂದ್ರದ ಸಿಸಿ ಟಿವಿ ಫುಟೇಜ್ ದಾಖಲೆಗಳು ಸಂಪೂರ್ಣ ಲಭ್ಯವಾಗದಿದ್ದಲ್ಲಿ ಅಥವಾ ತಿರುಚಿರುವುದು ಕಂಡು ಬಂದಲ್ಲಿ ಸಂಬಂಧಿಸಿದ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಸಂಬಂಧಿಸಿದ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದೆಂದು ಈಗಾಗಲೇ ಎಚ್ಚರಿಕೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದಲ್ಲಿ ಜೂನ್ 27ರ ಗಣಿತ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ನಾಲ್ವರು ವಿದ್ಯಾರ್ಥಿನಿಯರು ಮತ್ತು ಒಬ್ಬ ವಿದ್ಯಾರ್ಥಿಗೆ ಹಳೆ ಪಠ್ಯಕ್ರಮದ ಪ್ರಶ್ನೆ ಪತ್ರಿಕೆ ವಿತರಿಸಲಾಗಿದೆ ಎಂಬ ವರದಿಯನ್ನು ಇಂದು ಪತ್ರಿಕೆಗಳಲ್ಲಿ ಗಮನಿಸಲಾಗಿದ್ದು, ಈ ಪ್ರಕರಣದ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಸಲುವಾಗಿ ಅಂತಹ ಐದು ಪರಿಕ್ಷಾರ್ಥಿಗಳ ಉತ್ತರ ಪತ್ರಿಕೆಗಳನ್ನು ಪ್ರತ್ಯೇಕವಾಗಿ ಪರಿಶೀಲನೆ ನಡೆಸಿ ಅಚಾತುರ್ಯವಾಗಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ , ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮತ್ತು ಕೊಠಡಿ ಮೇಲ್ವಿಚಾರಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಆದೇಶ ನೀಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ನಿರ್ಮಲಾ ರಾಣಿ ಪ್ರೌಢಶಾಲೆಯ ವಿದ್ಯಾರ್ಥಿ ರಕ್ಷಿತಾ ಸುರೇಶ್ ಅಪೆಂಡಿಸೈಟಿಸ್ ತೊಂದರೆಯಿಂದ ಬಳಲುತ್ತಿದ್ದು, ಇಂದು ಮಲ್ಲೇಶ್ವರದ ಕೆಪಿಎಸ್ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ತೀವ್ರ ಹೊಟ್ಟೆನೋವಿನಿಂದ ಬಳಲಿದ್ದು, ಅಕೆಯನ್ನು ವೈದ್ಯಕೀಯ ಶುಶ್ರೂಷೆಗೆ ಕಳಲುಹಿಸಿ ಕೊಡಲಾಗಿದೆ. ಮುಂದಿನ ಪೂರಕ ಪರೀಕ್ಷೆಯಲ್ಲಿ ಆಕೆಗೆ ಬರೆಯುವ ಅವಕಾಶ ಕಲ್ಪಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಇಂದು 2879 ಪರೀಕ್ಷಾ ಕೇಂದ್ರಗಳು ಮತ್ತು 330 ಬ್ಲಾಕ್ ಪರೀಕ್ಷಾ ಕೇಂದ್ರಗಳಲ್ಲಿ ವಿಜ್ಞಾನ ಭಾಷಾ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ, ಪೊಲೀಸ್, ಸ್ವಯಂ ಸೇವಕರು ಅತ್ಯಂತ ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಂಡು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಮುಂದೆ ಬಾಕಿ ಇರುವ ಪರೀಕ್ಷೆಗಳ ಯಶಸ್ಸಿಗೂ ಅವರ ಬದ್ಧತೆ ಇದೇ ರೀತಿ ಇರಲಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ವ್ಯವಸ್ಥೆ ಮೇಲೆ ವಿಶ್ವಾಸವಿಟ್ಟುಕೊಳ್ಳಬೇಕೆಂದು ಸಚಿವರು ಮನವಿ ಮಾಡಿದರು.

ಶಿಕ್ಷಣ ಇಲಾಖೆ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆಯನ್ನು ಬರೆಯುವ ವಾತಾವರಣವನ್ನು ಕಲ್ಪಿಸಿದ್ದು ಯಾವುದೇ ವಿದ್ಯಾರ್ಥಿಗಳು ವಿಚಲಿತಗೊಳ್ಳದೇ ಇಂತಹ ಸಂದರ್ಭದಲ್ಲಿ ಕೇವಲ ತಮ್ಮ ಓದಿನ ಬಗ್ಗೆ ಮನಸ್ಸನ್ನು ಕೇಂದ್ರೀಕರಿಸಬೇಕು ಮತ್ತು ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯಬೇಕು. ಯಾವುದೇ ಪೋಷಕರು ಆತಂಕಕ್ಕೊಳಗಾಗದೇ, ತಮ್ಮ ಮಕ್ಕಳ ಹಿತದೃಷ್ಟಿಯಿಂದ ಸರ್ಕಾರ ತೆಗೆದುಕೊಂಡಿರುವ ಈ ಕ್ರಮದ ಕುರಿತು ಭರವಸೆಯೊಂದಿಗೆ ತಮ್ಮ ಮಕ್ಕಳನ್ನು ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕೆಂದು ಕೋರುತ್ತೇನೆ. ಐದು ದಿನಗಳ ಪರೀಕ್ಷಾ ಪ್ರಕ್ರಿಯೆಗಳು ಮುಕ್ತಾಯಗೊಂಡಿದ್ದು, ಪ್ರಥಮ ಮತ್ತು ತೃತೀಯ ಭಾಷೆಗಳು ಮಾತ್ರವೇ ಬಾಕಿಯಿರುತ್ತವೆ. ಮಕ್ಕಳು ಯಾವುದೇ ಆತಂಕವಿಟ್ಟುಕೊಳ್ಳದೇ ಮುಂದಿನ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದಲೇ ಬರೆಯಲೆಂದು ಸಚಿವರು ಆಶಿಸಿದ್ದಾರೆ.

- Call for authors -

LEAVE A REPLY

Please enter your comment!
Please enter your name here