ಬೆಂಗಳೂರು: ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಇಲ್ಲಿನ ವಿಕಾಸಸೌಧ ದಲ್ಲಿ ಗುರುವಾರ ಸರಣಿ ಸಭೆಗಳನ್ನು ನಡೆಸಿದ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಅಭಿವೃದ್ಧಿ ಕಾಮಗಾರಿಗಳ ವೇಗ ಹೆಚ್ಚಬೇಕು ಹಾಗೂ ಪೂರ್ವ ನಿಗಧಿತ ಸಮಯಕ್ಕೆ ಅವುಗಳ ಪ್ರಯೋಜನ ಜನರಿಗೆ ಲಭ್ಯವಾಗಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ರಾಮನಗರದಲ್ಲಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಆಸ್ಪತ್ರೆಯನ್ನು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ, ಜಿಲ್ಲೆಯ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಯೋಜನೆ, ಒಳಚರಡಿ ಸುಧಾರಣೆ ಸೇರಿ ಜಿಲ್ಲೆಯಲ್ಲಿ ಕಾರ್ಯಗತವಾಗುತ್ತಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರಲ್ಲದೆ, ಎಲ್ಲ ಯೋಜನೆಗಳು ಕಾಲಮಿತಿಯಲ್ಲಿ ಮುಗಿಯಲೇಬೇಕು ಎಂದು ಅಧಿಕಾರಿಗಳಿಗೆ ಖಡಕ್ಕಾಗಿ ಸೂಚನೆ ನೀಡಿದರು.
250 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ:
ಜಿಲ್ಲಾ ಕೇಂದ್ರದಲ್ಲಿ ಈಗ ನಿರ್ಮಾಣ ಆಗುತ್ತಿರುವ 250 ಹಾಸಿಗೆಗಳ ಆಸ್ಪತ್ರೆಯನ್ನು ಜಾಗತಿಕ ಗುಣಮಟ್ಟದ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯನ್ನಾಗಿ ಪರಿವರ್ತಿಸುವ ಕಾಮಗಾರಿಯ ಪ್ರಗತಿಯ ಬಗ್ಗೆ ಡಿಸಿಎಂ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಈ ಆಸ್ಪತ್ರೆಯಲ್ಲಿ ಕ್ಯಾನ್ಸರ್, ಹೃದ್ರೋಗ, ನರರೋಗ, ಎದೆ ಸಮಸ್ಯೆ ಮುಂತಾದ ಗಂಭೀರ ಕಾಯಿಲೆಗಳ ರೋಗಿಗಳಿಗೆ ಚಿಕಿತ್ಸೆ ನೀಡಲಾಗುವುದು. ಜತೆಗೆ ಈಗಾಗಲೇ ಜಿಲ್ಲಾ ಕೇಂದ್ರದಲ್ಲಿರುವ 100 ಹಾಸಿಗೆಗಳ ಅಸ್ಪತ್ರೆಯನ್ನು ತಾಯಿ-ಮಕ್ಕಳ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲು ಕೂಡ ಸಭೆಯಲ್ಲಿ ನಿರ್ಧರಿಸಲಾಯಿತು.
ಮಣಿಪಾಲ್ ಆಸ್ಪತ್ರೆ ತಜ್ಞ ವೈದ್ಯರು ಆಸ್ಪತ್ರೆಯ ನಿರ್ಮಾಣಕ್ಕೆ ಸೂಕ್ತ ಸಲಹೆ ನೀಡುತ್ತಿದ್ದು, ಜಾಗತಿಕ ಗುಣಮಟ್ಟಕ್ಕೆ ಯಾವುದೇ ರೀತಿಯಲ್ಲೂ ತಗ್ಗದಂತೆ ಸೌಲಭ್ಯಗಳ ವ್ಯವಸ್ಥೆ ಮಾಡಲಾಗುವುದು. ಮೂರು ತಿಂಗಳ ಅವಧಿಯಲ್ಲಿ ಈ ಆಸ್ಪತ್ರೆಯ ಕಾಮಗಾರಿ ಮುಗಿಯುತ್ತದೆ. ಈ ಭಾಗದ ಜನರಿಗೆ ಇನ್ನು ಮುಂದೆ ರಾಮನಗರದಲ್ಲಿಯೇ ಜಾಗತಿಕ ಗುಣಮಟ್ಟದ ಚಿಕಿತ್ಸೆ ದೊರೆಯಲಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಇಂಥ ಸುಸಜ್ಜಿತ ಆಸ್ಪತ್ರೆ ಅಗತ್ಯವಾಗಿತ್ತು ಎಂಬುದನ್ನು ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಈ ಸಭೆಯಲ್ಲಿ ಪಾಲ್ಗೊಂಡಿದ್ದ ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ನಿಗದಿತ ವೇಳೆಯಲ್ಲೇ ಈ ಆಸ್ಪತ್ರೆಯೂ ಜನರ ಸೇವೆಗೆ ಲಭ್ಯವಾಗುವಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿಗಳಿಗೆ ಹೇಳಿದರು.
ರಾಮನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್, ಜಿಲ್ಲಾ ಸರ್ಜನ್ ಡಾ. ಶಶಿಧರ್, ಜಿಲ್ಲೆಯ ತಜ್ಞ ವೈದ್ಯೆ ಡಾ. ಪದ್ಮಾ ಹಾಗೂ ಮಣಿಪಾಲ ಆಸ್ಪತ್ರೆಯ ವೈದ್ಯರು ಪಾಲ್ಗೊಂಡಿದ್ದರು.
ಕುಡಿಯುವ ನೀರಿನ ಯೋಜನೆ:
ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರೊದಿಗಿಸಲು ಇಗ್ಗಲೂರು ಅಣೆಕಟ್ಟೆಯಿಂದ ಕಣ್ವ, ಮಂಚನಬೆಲೆ ಮತ್ತು ವೈ.ಜಿ. ಗುಡ್ಡ ಜಲಾಶಯಗಳಿಗೆ ನೀರು ತುಂಬಿಸುವ ಕಾಮಗಾರಿಯ ಪ್ರಗತಿಯನ್ನು ಉಪ ಮುಖ್ಯಮಂತ್ರಿ ಪರಿಶೀಲನೆ ನಡೆಸಿದರು. 540 ಕೋಟಿ ರೂ. ವೆಚ್ಚದಲ್ಲಿ ಕಾರ್ಯಗತವಾಗುತ್ತಿರುವ ಈ ಯೋಜನೆಯೂ 2020ರ ಡಿಸೆಂಬರ್ ಹೊತ್ತಿಗೆ ಮುಗಿಯಲಿದ್ದು, ಕಾವೇರಿ ನದಿಯಿಂದ ಜಿಲ್ಲೆಗೆ ನೀರು ತರಲಾಗುತ್ತಿದೆ ಎಂದು ಅವರು ತಿಳಿಸಿದರು.
ಇದಾದ ಮೇಲೆ 1,800 ಕೋಟಿ ರೂ. ವೆಚ್ಚದಲ್ಲಿ ಮನೆಮನೆಗೂ ಶುದ್ಧ ಕುಡಿಯುವ ನೀರನ್ನು ಒದಗಿಸುವ ಯೋಜನೆ ಹಾಕಿಕೊಳ್ಳಲಾಗಿದ್ದು, ಇದಕ್ಕೆ ಕೇಂದ್ರದ ಒಪ್ಪಿಗೆಯನ್ನು ಪಡೆಯಬೇಕಾಗಿದೆ. ಇನ್ನು 311 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಯ ಒಟ್ಟು 2.8 ಲಕ್ಷ ಮನೆಗಳ ಪೈಕಿ ಮೊದಲ ಹಂತದಲ್ಲಿ 75,000 ಮನೆಗಳಿಗೆ ಶುದ್ಧ ನೀರು ಒದಗಿಸುವ ಯೋಜನೆ ಪ್ರಗತಿಯಲ್ಲಿದೆ. ಎಲ್ಲ ಯೋಜನೆಗಳನ್ನು ನಿಗದಿತ ಕಾಲಮಿತಿಯಲ್ಲೇ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಡಿಸಿಎಂ ತಾಕೀತು ಮಾಡಿದರು.
ರಾಮನಗರ, ಚನ್ನಪಟ್ಟಣ, ಬಿಡದಿ, ಮಾಗಡಿ ಮತ್ತು ಕನಕಪುರ ಪಟ್ಟಣಗಳಿಗೆ ಕುಡಿಯುವ ನೀರು ಮತ್ತು ಒಳಚರಂಡಿ ಯೋಜನೆಗಳ ಪ್ರಗತಿಯನ್ನು ಕೂಡ ಡಿಸಿಎಂ ಪರಿಶೀಲನೆ ನಡೆಸಿದರು. ರಾಮನಗರ ಪಟ್ಟಣಕ್ಕೆ 456 ಕೋಟಿ ರೂ. ವೆಚ್ಚದಲ್ಲಿ ಹಾಗೂ ಬಿಡದಿ ಪಟ್ಟಣಕ್ಕೆ 171 ಕೋಟಿ ರೂ. ವೆಚ್ಚದಲ್ಲಿ ನೀರು ಒದಗಿಸುವ ಕಾಮಗಾರಿ ಭರದಿಂದ ನಡೆಯುತ್ತಿದ್ದು ಈ ಕಾಮಗಾರಿಗಳು ಪೂರ್ವ ನಿಗದಿತ ಎರಡು ವರ್ಷದಲ್ಲಿಯೇ ಪೂರ್ಣ ಆಗಲೇಬೇಕು ಎಂದು ಡಿಸಿಎಂ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಭೆಯಲ್ಲಿ ಜಿಲ್ಲೆಯ ಉನ್ನತ ಅಧಿಕಾರಿಗಳ ಜತೆಗೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಜಯರಾಂ, ಬೆಂಗಳೂರು ಜಲಮಂಡಳಿ ಮುಖ್ಯ ಎಂಜಿನಿಯರ್ ರಮೇಶ್, ನಗರ ನೀರು ಸರಬರಾಜು ಮಂಡಳಿ ಮುಖ್ಯ ಎಂಜಿನಿಯರ್ ದಿನೇಶ್, ಸಣ್ಣ ನೀರಾವರಿ ಇಲಾಖೆಯ ಮುಖ್ಯ ಎಂಜಿನೀಯರ್ ಶಂಕರೇ ಗೌಡ, ಗ್ರಾಮೀಣ ನೀರು ಸರಬರಾಜು ಇಲಾಖೆಯ ಮುಖ್ಯ ಎಂಜಿನೀಯರ್ ಬಸಪ್ಪ ಉಪಸ್ಥಿತರಿದ್ದರು.
ಈ ಎಲ್ಲ ಸಭೆಗಳಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿ ಅರ್ಚನಾ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಸೇರಿದಂತೆ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.









