ಬೆಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಎರಡನೇ ಬಾರಿಗೆ ನಡೆದ ಪರೀಕ್ಷೆಯಲ್ಲೂ ನೆಗೆಟಿವ್ ಬಂದಿದ್ದು ಅವರನ್ನು ಆಸ್ಪತ್ತೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಸಿದ್ದರಾಮಯ್ಯ ಅವರು ಮೂತ್ರದ ಸೋಂಕಿನ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಕಳೆದ ಹತ್ತು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರು, ಸಿಬ್ಬಂದಿಗೆ ಸಿದ್ದರಾಮಯ್ಯ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಗುಣಮುಖರಾಗುವಂತೆ ತಮಗೆ ಹಾರೈಸಿದ ನಾಡಿನ ಜನತೆ ಸೇರಿದಂತೆ ಎಲ್ಲರಿಗೂ ಸಿದ್ದರಾಮಯ್ಯ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರು ಮನೆಯಲ್ಲಿ ಒಂದು ವಾರ ವಿಶ್ರಾಂತಿ ಪಡೆಯಲಿದ್ದಾರೆ.
ಸಿದ್ದರಾಮಯ್ಯ ಜೊತೆ ಅವರ ಪುತ್ರ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರೂ ಇಂದು ಕೊರೊನಾ ನೆಗಟಿವ್ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾದರು.









