ಬೆಂಗಳೂರು. ಆ.29: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಮೂವರು ಅಧಿಕಾರಿಗಳನ್ನು ಭೂ ಒಡೆಯತನ ಯೋಜನೆಯಲ್ಲಿ ಲಂಚ ಪಡೆದ ಆರೋಪದಡಿ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಬಂಧಿಸಿದ್ದು, ಈ ಮೂವರು ಅಧಿಕಾರಿಗಳನ್ನು ಅಮಾನತು ಗೊಳಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.
ನಿಗಮದ ಪ್ರಧಾನ ವ್ಯವಸ್ಥಾಪಕ ಎಸ್.ಎಸ್. ನಾಗೇಶ್, ಸಹಾಯಕ ಪ್ರಧಾನ ವ್ಯವಸ್ಥಾಪಕಿಮಂಜುಳ ಮತ್ತು ಕಚೇರಿ ಅಧೀಕ್ಷಕ ಪಿ.ಡಿ. ಸುಬ್ಬಪ್ಪ ಅವರು ಕರ್ನಾಟಕ ನಾಗರಿಕ ಸೇವಾ ನಿಯಮದನ್ವಯ ಕರ್ತವ್ಯ ಲೋಪವೆಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದ್ದು, ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ಅಮಾನತು ಮಾಡಲಾಗಿದೆ. ಅಮಾನತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡಬಾರದು ಎಂದು ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.









