ಬೆಂಗಳೂರು: ಹೆಚ್ಚುತ್ತಿರುವ ಕೋವಿಡ್-19 ತಡೆಗೆ ಲಾಕ್ ಡೌನ್ ಮಾಡುವಂತೆ ತಜ್ಞರ ಸಮಿತಿ ಶಿಫಾರಸ್ಸಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಪ್ಪಿಗೆ ಸೂಚಿಸಿದ್ದು ಜುಲೈ 14 ರಿಂದ 22 ರವರೆಗೆ ಬೆಂಗಳೂರಿನಲ್ಲಿ ಲಾಕ್ ಡೌನ್ ಜಾರಿಗೊಳಿಸಿ ಆದೇಶಿಸಿದ್ದಾರೆ.
ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ದಿನಾಂಕ: 14.07.2020ರ ಮಂಗಳವಾರ ರಾತ್ರಿ 8.00 ಗಂಟೆಯಿಂದ 1 ವಾರಗಳ ಕಾಲ ಅಂದರೆ ದಿನಾಂಕ: 22.07.2020 ರ ಬೆಳಿಗ್ಗೆ 5.00 ಗಂಟೆಯವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗುವುದು.
ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷದಿ ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಿರುತ್ತವೆ. ಇದರ ಜೊತೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿವೆ.
ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ, ಸರ್ಕಾರ ಹೊರಡಿಸುವ ಲಾಕ್ ಡೌನ್ ಸಂಬಂಧಿತ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿ ಸಹಕರಿಸಿ. ತಾವು ಲಾಕ್ಡೌನ್ ಸಂಧರ್ಬದಲ್ಲಿ ಮನೆಯಲ್ಲೇ ಇರುವ ಮೂಲಕ ಕೋವಿಡ್-19ರ ನಿಯಂತ್ರಣಕ್ಕೆ ಕೈ ಜೋಡಿಸಿ.
ಕೋವಿಡ್-19 ಸೋಂಕು ಹರಡುವುದನ್ನು ನಿಯಂತ್ರಿಸಲು ಹಗಲಿರಳು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಮತ್ತು ಪೋಲಿಸ್ ಸಿಬ್ಬಂದಿಗಳು ಹಾಗೂ ಎಲ್ಲಾ ಅಧಿಕಾರಿಗಳು, ಸ್ವಯಂ ಸೇವಕರು ಮನೆ ಮನೆಗೂ ಕೋವಿಡ್-19 ಕುರಿತು ಮಾಹಿತಿ ನೀಡುತ್ತಿರುವ ಪತ್ರಕರ್ತರು ಮತ್ತು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ನಾನು ಇನ್ನೊಮ್ಮೆ ಅಭಿನಂದನೆ ಸಲ್ಲಿಸುತ್ತೇನೆ.
ಕೋವಿಡ್-19ಸೋಂಕು ಹರಡುವುದನ್ನು ನಿಯಂತ್ರಿಸಲು ನಿಮ್ಮ ಸಹಯೋಗ ಅತಿ ಅಗತ್ಯ ಎಂದು ಸಿಎಂ ಮನವಿ ಮಾಡಿದ್ದಾರೆ.









