ಬೆಂಗಳೂರು: ಕೊರೋನಾ ಮಹಾಮಾರಿ ಜೊತೆಗೆ ಇದೀಗ ದೇಶಕ್ಕೆ ಮತ್ತೊಂದು ಗಂಡಾತರ ಎದುರಾಗಿದೆ. ರಕ್ಕಸ ಮಿಡತೆಗಳು ರೈತರ ಪಾಲಿಗೆ, ಮನುಕುಲದ ಪಾಲಿಗೆ ವಿನಾಶಕಾರಿಯಾಗಿವೆ. ಈ ಕುರಿತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಎಚ್ಚರಿಸೋ ಕೆಲಸ ಮಾಡಿದ್ದಾರೆ. ಉತ್ತರ ಭಾರತವನ್ನು ಬಾಧಿಸುತ್ತಿರುವ ರಕ್ಕಸ ಮಿಡತೆಗಳು ಮಹಾರಾಷ್ಟ್ರ ಪ್ರವೇಶಿಸಿದ್ದು ಕರ್ನಾಟಕಕ್ಕೂ ಪ್ರವೇಶಿಸುವ ಆತಂಕವಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕ್ಷಣಾರ್ಧದಲ್ಲಿ ಬೆಳೆ ತಿಂದು ಹೋಗುವ ಈ ಮಿಡತೆಗಳು ಭವಿಷ್ಯದಲ್ಲಿ ಆಹಾರ ಕೊರತೆಗೆ ಕಾರಣವಾಗುತ್ತವೆ. ಹೀಗಾಗಿ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.
ಮಿಡತೆಗಳ ಹಿಂಡು ಸದ್ಯ ಮಹಾರಾಷ್ಟ್ರದ ಅಮರಾವತಿಯಲ್ಲಿವೆ ಎಂಬ ಮಾಹಿತಿ ಇದೆ. ಅಮರಾವತಿ ಭೌಗೋಳಿಕವಾಗಿ ನಮ್ಮ ಬೀದರ್, ಕಲಬುರ್ಗಿಗೆ ಹತ್ತಿರದ ಜಿಲ್ಲೆ. ಪೂರ್ವ ಆಫ್ರಿಕಾ, ಇರಾನ್ ಮರುಭೂಮಿಯಲ್ಲಿ ಕಂಡುಬರುವ ಈ ಮಿಡತೆಗಳು ಪಾಕಿಸ್ತಾನದ ಮೂಲಕ ಭಾರತ ಪ್ರವೇಶಿಸಿವೆ. ಇವುಗಳಿಗೆ ಜಿಲ್ಲೆಗಳನ್ನು ದಾಟುವುದು ಅಸಾಧ್ಯವೇನಲ್ಲ.
1 ಚದರ ಕಿ.ಮೀ ಪ್ರದೇಶದಲ್ಲಿ 4ಕೋಟಿ ಮಿಡತೆಗಳು ಇರುತ್ತವೆ. ತಮ್ಮ ದೇಹ ಗಾತ್ರದದಷ್ಟೇ ಆಹಾರವನ್ನು ಈ ಮಿಡತೆಗಳು ತಿನ್ನುತ್ತವೆ ಎಂದರೆ, ಇವು ಯಾವ ಪ್ರಮಾಣದಲ್ಲಿ ಬೆಳೆ ನಾಶ ಮಾಡುತ್ತವೆ ಎಂಬುದನ್ನು ಲೆಕ್ಕಿಸಬಹುದು. ಹೀಗಾಗಿ, ರಾಜಸ್ಥಾನ, ಮಧ್ಯಪ್ರದೇಶ, ಉತ್ತರಪ್ರದೇಶದಲ್ಲಿ ಔಷಧ ಸಿಂಪಡಣೆ ದೊಡ್ಡ ಪ್ರಮಾಣದಿಂದ ನಡೆಯುತ್ತಿದೆ.
ರಾಜ್ಯಕ್ಕೂ ಇವುಗಳ ಭೀತಿ ಇರುವುದರಿಂದ ಸರ್ಕಾರ ಕೂಡಲೇ ರಾಜಸ್ಥಾನ, ಮಧ್ಯಪ್ರದೇಶ, ಉತ್ತರ ಪ್ರದೇಶದ ಅಭಿಪ್ರಾಯ ಪಡೆದು ಕಾರ್ಯತಂತ್ರಗಳಿಗೆ ಸಿದ್ಧವಾಗಬೇಕು.ಸಂಭಾವ್ಯ ಅಪಾಯವನ್ನು ಮೊದಲೇ ಹಿಮ್ಮೆಟ್ಟಿಸಬೇಕು ಅಂತಾ ಸಲಹೆ ನೀಡಿದ್ದಾರೆ. ಅಲ್ಲದೆ, ಬೆಳೆ ತಿಂದು ರೈತರ ಬದುಕು ಅತಂತ್ರ ಮಾಡುವ ಈ ರಕ್ಕಸ ಮಿಡತೆಗಳು ರಾಜ್ಯಕ್ಕೆ ಬಾರದೇ ಇರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.










