ಮುಧೋಳ ಜೂ.1: ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಮುಧೋಳ್ ತಾಲ್ಲೂಕ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯನ್ನು ನಡೆಸಿ, ಪ್ರಗತಿ ಪರಿಶೀಲನೆ ನಡೆಸಿದರು.
ಎಲ್ಲಾ ಇಲಾಖೆಗಳು ಶೇ. 100 ಪ್ರಗತಿ ಸಾಧಿಸಬೇಕಿತ್ರು. ಆದರೆ ಆರ್ಥಿಕ ವರ್ಷದ ಅಂತ್ಯದಲ್ಲಿ ಕೊನೊನಾ ವೈರಸ್ ಹಿನ್ನೆಲೆಯಲ್ಲಿ ಕೆಲವೊಂದು ಇಲಾಖೆಗಳು ಶೇ. 100ರಷ್ಟು ಪ್ರಗತಿ ಸಾಧಿಸಲಾಗಿಲ್ಲ. ಸ್ಥಗಿತ ಗೊಳಿಸಿದ್ದ ಕಾಮಗಾರಿಗಳನ್ನು ಪುನರ್ ಪ್ರಾರಂಭಿಸಿ ಪೂರ್ಣಗೊಳಿಸಿ, ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅಧಿಕಾರಿಗಳು ಕ್ಷೇತ್ರ ಪರಿವೀಕ್ಷಣೆ ನಡೆಸಿ, ಕಾಮಗಾರಿಗಳನ್ನು ಪರಿಶೀಲಿಸಬೇಕು. ಕೊರೊನಾ ನಿಯಂತ್ರಣ ಕ್ಕಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಕ್ವಾರಂಟೈನ್ ನಲ್ಲಿರುವವರು ಹಸಿವಿನಿಂದ ಬಳಲಬಾರದು. ಅವರಿಗೆ ಎಲ್ಲಾ ಸೌಲಭ್ಯಗಳನ್ನು ನೀಡಿ, ಸುರಕ್ಷಿತ ವಾಗಿರುವಂತೆ ಕ್ರಮಕೈಗೊಳ್ಳಬೇಕು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊರೊನಾ ಹಿನ್ನೆಲೆಯಲ್ಲಿ ಅನೇಕ ಸಮುದಾಯದವರಿಗೆ ಘೋಷಿಸಿದ ಪರಿಹಾರ ಧನವನ್ನು ಕೂಡಲೇ ಫಲಾನುಭವಿಗಳ ಖಾತೆಗೆ ಜಮೆ ಮಾಡಬೇಕು. ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು. ಮುಂಗಾರು ಹಂಗಾಮು ಈಗಾಗಲೇ ಪ್ರಾರಂಭವಾಗಿರುವುದರಿಂದ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆ ಮಾಡಬೇಕು.
ಎಲ್ಲಾ ಅಧಿಕಾರಿಗಳು ಸ್ವಯಂ ಪ್ರೇರಿತರಾಗಿ ಸಕ್ರೀಯವಾಗಿ ಕಾರ್ಯನಿರ್ವಹಿಸಿ , ಕ್ಷೇತ್ರದ ಅಭಿವೃದ್ಧಿ ಗೆ ಶ್ರಮಿಸಬೇಕು ಎಂದು ಅವರು ಸೂಚಿಸಿದರು.
ಮುಧೋಳ್ ಬೈಪಾಸ್ ರಸ್ತೆ ಕಾಮಗಾರಿ ವೀಕ್ಷಿಸಿದ ಕಾರಜೋಳ:
ಡಿಸಿಎಂ ಗೋವಿಂದ ಎಂ ಕಾರಜೋಳ ಅವರು ಇಂದು ಮುಧೋಳ್ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯ ಪ್ರಗತಿ ಪರಿಶೀಲನೆ ಹಾಗೂ ಗುಣಮಟ್ಟವನ್ನು ಪರಿಶೀಲನೆ ನಡೆಸಿ, ಈ ಕಾಮಗಾರಿ ನಿರ್ಮಾಣ ಮತ್ತು ಭೂಸ್ವಾಧೀನಕ್ಕಾಗಿ ಒಟ್ಟು 72 ಕೋಟಿ ವೆಚ್ಚದ್ದಾಗಿದ್ದು, ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ನಿರಂತರವಾಗಿ ಭೇಟಿ ನೀಡಿ, ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಬೇಕು. ಈ ಕಾಮಗಾರಿಯಿಂದ ಮುಧೋಳ್ ನಲ್ಲಿ ವಾಹನಗಳ ದಟ್ಟಣೆ ಕಡಿಮೆಯಾಗಿ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.










