ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ 500 ಬೆಡ್:ಆಸ್ಪತ್ರೆ ಆಡಳಿತ ಮಂಡಳಿ ಜತೆ ಡಿಸಿಎಂ ಚರ್ಚೆ

0
4

ಬೆಂಗಳೂರು: ನಗರದ ಪ್ರತಿಷ್ಟಿತ ಆಸ್ಪತ್ರೆಗಳಲ್ಲಿ ಒಂದಾದ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿತರಿಗಾಗಿ ಈಗಾಗಲೇ 340 ಹಾಸಿಗೆಗಳನ್ನು ಮೀಸಲಿಡಲಾಗಿದ್ದು, ಮುಂದಿನ ಎರಡು ವಾರದಲ್ಲಿ ಅವುಗಳನ್ನು 500 ಹಾಸಿಗೆಗಳಿಗೆ ಹೆಚ್ಚಿಸಿ ಸರಕಾರದ ವಶಕ್ಕೆ ನೀಡಲಿದೆ.

ಶನಿವಾರ ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳ ಮುಖ್ಯಸ್ಥ ಎಂ.ಆರ್. ಜಯರಾಮ್ ಹಾಗೂ ಎಂ.ಎಸ್. ರಾಮಯ್ಯ ವೈದ್ಯಕೀಯ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ ಮೂರ್ತಿ ಅವರು ಈ ಭರವಸೆ ನೀಡದರು. ಇದೇ ವೇಳೆ ಡಿಸಿಎಂ ಅವರು ಕಾಲೇಜು ಸಿಬ್ಬಂದಿ ಜತೆ ಸಭೆ ನಡೆಸಿದರಲ್ಲದೆ, ಬೋರ್ಡ್ ರೂಂನಿಂದಲೇ ಸಿಸಿಟಿವಿ ಕ್ಯಾಮೆರಾಗಳ ಮೂಲಕ ಕೋವಿಡ್ ವಾರ್ಡ್’ಗಳನ್ನು ವೀಕ್ಷಿಸಿ ಅಲ್ಲಿನ ಅಚ್ಚುಕಟ್ಟುತನಕ್ಕೆ ತೃಪ್ತಿ ವ್ಯಕ್ತಪಡಿಸಿದರು.

ಪದೇಪದೆ ಮನವಿ ಮಾಡಿದರೂ ತಮ್ಮಲ್ಲಿರುವ ಅರ್ಧದಷ್ಟು ಹಾಸಿಗೆಗಳನ್ನು ಸರಕಾರಕ್ಕೆ ನೀಡಲು ಮೀನಾಮೇಷ ಎಣಿಸುತ್ತಿರುವ ಕೆಲ ಖಾಸಗಿ ಆಸ್ಪತ್ರೆಗಳ ನಡುವೆಯೇ ನಾವು ಕೇಳುವುದಕ್ಕೆ ಮುನ್ನವೇ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ, ಹಾಸಿಗೆಗಳನ್ನು ನೀಡಲು ಮುಂದೆ ಬಂದಿರುವ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬದ್ಧತೆ ಮತ್ತು ಸೇವಾ ತತ್ಪರತೆಯನ್ನು ಮುಕ್ತಮನಸ್ಸಿನಿಂದ ಮೆಚ್ಚಲೇಬೇಕು ಎಂದು ಡಿಸಿಎಂ ಹೇಳಿದರು.

ಸದ್ಯಕ್ಕೆ 340 ಹಾಸಿಗೆಗಳು ಕೋವಿಡ್ ಸೋಂಕಿತರಿಗೆ ಸಿದ್ಧವಾಗಿ ಬಳಕೆಯಾಗುತ್ತಿವೆ. ಇನ್ನೆರಡು ವಾರದಲ್ಲಿ ಮತ್ತೆ 160 ಹಾಸಿಗೆಗಳು ಲಭ್ಯವಾಗುತ್ತವೆ ಎಂದು ಶ್ರೀನಿವಾಸಮೂರ್ತಿ ಅವರು ಉಪ ಮುಖ್ಯಮಂತ್ರಿ ಗಮನಕ್ಕೆ ತಂದರು.

ವೆಂಟಿಲೇಟರ್ ಸಂಖ್ಯೆ ಹೆಚ್ಚಳ:
ಸದ್ಯಕ್ಕೆ ಈ ಆಸ್ಪತ್ರೆಯಲ್ಲಿ ಐದು ವೆಂಟಿಲೇಟರುಗಳಿವೆ. ಅವುಗಳ ಸಂಖ್ಯೆಯನ್ನು 25ಕ್ಕೆ ಹೆಚ್ಚಿಸಬೇಕು. 50 ಐಸಿಯು ಬೆಡ್ ಗಳನ್ನು ಕನಿಷ್ಠ 100 ರಿಂದ 150 ಮಾಡಬೇಕು ಎನ್ನುವ ಡಿಸಿಎಂ ಅವರ ಮನವಿಗೆ ಸ್ಪಂದಿಸಿದರು.

ಔಷಧ ಪೂರೈಕೆ:
ಕೋವಿಡ್ ಸೋಂಕಿತರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ’ರೆಮೀಡಿಸ್ ಸ್ವೀರ್’ ಎಂಬ ಚುಚ್ಚುಮದ್ದಿನ ಕೊರತೆ ಇದ್ದು, ಅದನ್ನು ಸರಕಾರ ಪೂರೈಸಬೇಕು ಎಂದು ಆಸ್ಪತ್ರೆ ಆಡಳಿತ ವರ್ಗ ಮನವಿ ಮಾಡಿತು. ಇದಕ್ಕೂ ಸ್ಪಂದಿಸಿದ ಡಿಸಿಎಂ, ಅಗತ್ಯವಿರುವಷ್ಟು ಚುಚ್ಚುಮದ್ದು, ಮತ್ತಿತರೆ ಎಲ್ಲ ಔಷಧಗಳನ್ನು ಕೂಡಲೇ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಿಬ್ಬಂದಿ ಕೊರತೆ:
ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಒಟ್ಟು ಸಿಬ್ಬಂದಿಯ ಪೈಕಿ ಶೇ.10ರಷ್ಟು ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲುತ್ತಿದೆ. ಎಷ್ಟೇ ಮುನ್ನೆಚ್ಚರಿಕೆ ವಹಿಸಿದರೂ ಚಿಕಿತ್ಸೆ ವೇಳೆ ಸೋಂಕು ತಗುಲುತ್ತಿದೆ. ಆದರೂ ನಮ್ಮ ಸಿಬ್ಬಂದಿ ಛಲದಿಂದ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಈಗ ಆಸ್ಪತ್ರೆಯಲ್ಲಿ ವೈದ್ಯರು, ಅರೆ ವ್ಯದ್ಯಕೀಯ ಸಿಬ್ಬಂದಿ ಕೊರತೆ ಇದೆ ಎಂದು ಸಿಇಒ ಶ್ರೀನಿವಾಸಮೂರ್ತಿ ಹೇಳಿದರು.
ಕೆ.ಸಿ.ಜನರಲ್ ಆಸ್ಪತ್ರೆಗೆ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯ ನೆರವು ಒದಗಿಸಬೇಕೆನ್ನುವ ಡಿಸಿಎಂ ಅವರ ಮನವಿಗೂ ಸ್ಪಂದಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಹಿರಿಯ ಅಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು, ಆರೋಗ್ಯ ಮತ್ತು ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

- Call for authors -

LEAVE A REPLY

Please enter your comment!
Please enter your name here