ಬೆಂಗಳೂರು: ಕಾವೇರಿ ಐದನೇ ಹಂತದ ಯೋಜನೆ ಕುರಿತು ಬೆಂಗಳೂರು ನೀರು ಸರಬರಾಜು ಮತ್ತು ಜಲಮಂಡಲಿ ಅಧಿಕಾರಿಗಳೊಂದಿಗೆ ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್ ಅವರು ಮಂಗಳವಾರ ಬಿಎಂಆರ್ಡಿಎನಲ್ಲಿ ಸಭೆ ನಡೆಸಿದರು.
ಬೆಂಗಳೂರು ಜನರ ನೀರಿನ ಬವಣೆ ನೀಗಿಸುವ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಂಡಿರುವ ಬಗ್ಗೆ ವಿಸ್ಕೃತವಾಗಿ ಚರ್ಚಿಸಲಾಯಿತು.
ಪ್ರಸ್ತುತ ಬೆಂಗಳೂರಿಗೆ ವಾರ್ಷಿಕ ೧೯ ಟಿಎಂಸಿ ನೀರನ್ನು ಕಾವೇರಿಯಿಂದ ಪೂರೈಕೆ ಮಾಡಲಾಗುತ್ತಿದೆ. ಕಾವೇರಿ ಐದನೇ ಹಂತದ ಯೋಜನೆ ಅನುಷ್ಠಾನದಿಂದ ಹೊಸ ೧೧೦ ಹಳ್ಳಿಗಳಿಗೆ ನೀರು ಪೂರೈಕೆ ಹಾಗೂ ಬೇಡಿಕೆ ನೀಗಿಸಲು ಇರುವ ಪರ್ಯಾಯ ಮಾರ್ಗಗಳ ಬಗ್ಗೆ ಚರ್ಚಿಸಲಾಯಿತು.
ನೀರು ಸೋರಿಕೆ ತಡೆಗಟ್ಟುವಿಕೆ ಹಾಗೂ ಹೊಸ ಯೋಜನೆ ಅನುಷ್ಠಾನಗೊಂಡರೆ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ನೀಗಲಿದೆ. ಈ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನೂತನ ಯೋಜನೆಗಳನ್ನು ಆದಷ್ಟು ಶೀಘ್ರವೇ ಅನುಷ್ಠಾನಕ್ಕೂ ಅಧಿಕಾರಿಗಳಿಗೆ ನಿರ್ದೇಶಿಸಿದರು. ಸಭೆಯಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಹಾಗೂ ಬಿಡಬ್ಲ್ಯೂಎಸ್ಎಸ್ಬಿ ಅಧಿಕಾರಿಗಳು ಇದ್ದರು.









